🌹🌹🌹🌹🌹🌹🌹🌹
*ಸರ್ವರಿಗೂ ಮಕರ ಸಂಕ್ರಮಣದ ಹಾರ್ದಿಕ ಶುಭಾಶಯಗಳು.*
ಸಂಕ್ರಾಂತಿ ಬಗ್ಗೆ ಒಂದಷ್ಟು ಮಾಹಿತಿ.🖊📚
ಸಂಕ್ರಾಂತಿ ಸೂರ್ಯಾರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ದವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು *ಪೊಂಗಲ್* *ಸುಗ್ಗಿ ಹಬ್ಬ* ಎಂದೂ ಕರೆಯಲಾಗುತ್ತದೆ. ಪೊಂಗಲ್ ಎಂದರೆ ಅಕ್ಕಿ ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖಾದ್ಯ. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯ ಮಾಡಲಾಗುವುದು.
ಕರ್ನಾಟಕದಲ್ಲಿ ಎಳ್ಳು, ಸಕ್ಕರೆ - ಅಚ್ಚುಗಳನ್ನು ನೆರೆಯವರಿಗೆ, ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ ಈ ಹಬ್ಬದ ಒಂದು ವಿಶೇಷ. ದನಕರುಗಳಿಗೆ ಮೈ ತೊಳೆದು - ಭೂತ ಪೀಡೆಗಳಿಂದ ಅವುಗಳನ್ನು ರಕ್ಷಿಸುವ ಸಲುವಾಗಿ - ಬೀದಿಗಳಲ್ಲಿ ಹೊತ್ತಿಸಿದ ಬೆಂಕಿಯನ್ನು ನೆಗೆದು ದಾಟಿಸುವುದು ಉಂಟು. ಜಗಚ್ಚಕ್ಷುವಾದ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಯನ್ನು ಪ್ರವೇಶಿಸುವ ಸಂಧಿ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಹೆಸರು. ಸೌರಮಾನದ ಪ್ರಕಾರ ಸೂರ್ಯನು ಮೇಷಾದಿ ಹನ್ನೆರಡು ರಾಶಿಗಳನ್ನು ಪ್ರವೇಶಿಸುವಾಗಲೂ ಸಂಕ್ರಾಂತಿ ಬರುತ್ತದೆ. ಆದರೆ ಅವುಗಳಲ್ಲಿ ಕರ್ಕಾಟಕ ಸಂಕ್ರಾಂತಿ ಹಾಗೂ ಮಕರ ಸಂಕ್ರಾಂತಿಗಳು ದಕ್ಷಿಣಾಯನ, ಉತ್ತರಾಯಣಗಳ ಪ್ರಾರಂಭದ ದಿನಗಳಾದ್ದರಿಂದ ವಿಶೇಷ ಮಹತ್ವವುಳ್ಳವುಗಳಾಗಿವೆ. ಸಂಕ್ರಾಂತಿ ಒಂದು ವಿಧದಲ್ಲಿ ಸೂರ್ಯಾರಾಧನೆ. ಸೂರ್ಯದೇವ ವಿಶ್ವದ ಆತ್ಮ; ಜಗತ್ತಿನ ಕಣ್ಣು; ಮಳೆ ಬೀಳಲು, ಬೆಳೆ-ಬೆಳೆಯಲು, ಇಳೆ ಬೆಳಗಲು ಸೂರ್ಯನೇ ಕಾರಣ ಆ ಸವಿತೃ ದೇವನ ದಿವ್ಯ ತೇಜಸ್ಸು ನಮಗೆ ಸಿದ್ದಿ ಬುದ್ದಿ ಸಮೃದ್ದಿಗಳನ್ನು ನೀಡಬಲ್ಲದು.
*ಉತ್ತರಾಯಣ ಪುಣ್ಯ ಕಾಲ* : ಸಾಮಾನ್ಯವಾಗಿ ಪುಷ್ಯ ಮಾಸದಲ್ಲಿ ಬರುವ (ಜನವರಿ 14 ಅಥವಾ 15 ರಂದು) ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯಕಾಲವೆಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಮಾತ್ರವಲ್ಲ, ಸಾಯುವುದಕ್ಕೂ ಉತ್ತರಾಯಣ ಪುಣ್ಯಕಾಲ ಶ್ರೇಷ್ಠವೆಂದು ಹೇಳಲಾಗಿದೆ. ಅದಕ್ಕಾಗಿಯೇ ಭೀಷ್ಮ ದೇಹ ತ್ಯಜಿಸಲು, ಉತ್ತರಾಯಣದ ಕಾಲದವರೆಗೂ, ಶರಶಯ್ಯೆಯಲ್ಲಿ ಹರಿಸ್ಮರಣೆ ಮಾಡುತ್ತಾ ಕಾದಿದ್ದರು. ಉತ್ತರಾಯಣ, ದೇವತೆಗಳ ಕಾಲ, ದಕ್ಷಿಣಾಯನ ಪಿತೃಗಳ ಕಾಲವಾಗಿರುತ್ತದೆ. ಆದ್ದರಿಂದ ಯಜ್ಞ ಯಾಗಾದಿಗಳಿಗೆ, ಸಮಸ್ತ ದೇವತಾ ಕಾರ್ಯ ಶುಭಕಾರ್ಯಗಳಿಗೆ ಉತ್ತರಾಯಣ ಕಾಲ ಶ್ರೇಷ್ಠವಾಗಿದೆ. ಸೂರ್ಯನು ಇದೇ ಜನವರಿ 14 ರಂದು ರಾತ್ರಿ 12 ಗಂಟೆ 57 ನಿಮಿಷಕ್ಕೆ ನಿರಯಣ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಈ ವೇಳೆಗೆ ರಾತ್ರಿಯಾಗಿದ್ದರಿಂದ ಜನವರಿ 15ರಂದು ಮಕರ ಸಂಕ್ರಾತಿಯನ್ನು ಆಚರಿಸಲಾಗುತ್ತದೆ. 15ರಂದು ಹಗಲು ಪೂರ್ತಿ ಅಂದರೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪುಣ್ಯ ಕಾಲವಿರುತ್ತದೆ. ಈ ಪುಣ್ಯ ಕಾಲದಲ್ಲಿ ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ, ಎಳ್ಳು ದಾನ ಮಾಡಬೇಕು. ದೇವಸ್ಥಾನಗಳಲ್ಲಿ ಎಳ್ಳೆಣ್ಣೆ ದೀಪ ಹಚ್ಚಬೇಕು. ಮಾಡಿದ ದಾನ, ಜನ್ಮ ಜನ್ಮದಲೂ ಸದಾ ನಮಗೆ ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ. ಇದಕ್ಕಾಗಿಯೇ ಎಳ್ಳು - ಬೆಲ್ಲ ಹಂಚುವುದು. ಜನವರಿ 14 ಅಥವಾ 15 ರಂದು, ಎಳ್ಳು - ಬೆಲ್ಲವನ್ನು ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ, ಮಕರ ಸಂಕ್ರಾಂತಿಯ ಒಂದು ವಿಶೇಷ. ಸೂರ್ಯನು ಒಂದು ರಾಶಿಯಿಂದ, ಮತ್ತೊಂದು ರಾಶಿಗೆ ಪ್ರವೇಶಿಸುವುದಕ್ಕೆ *ಸಂಕ್ರಾಂತಿ* ಎಂದು ಹೆಸರು. ಈ ಸಂಕ್ರಾಂತಿಯ ಕಾಲ, ಪುಣ್ಯ ಕಾಲವಾಗಿರುತ್ತದೆ. . ಸಂಕ್ರಾಂತಿ ಪುಣ್ಯ ಕಾಲದಲ್ಲಿ, ನದಿ ಸ್ನಾನ, ದೇವತೆಗಳಿಗೆ, ಪಿತೃಗಳಿಗೆ ತರ್ಪಣ, ಉಪವಾಸ, ಹೋಮ, ಜಪ, ದಾನಗಳಿಗೆ ಪ್ರಶಸ್ತವೆನಿಸಿದ್ದು, ವಿದ್ಯುಕ್ತವಾಗಿ ನಡೆಸಬೇಕಾದ ಕಾರ್ಯಗಳು. ಆಯನವೆಂದರೆ ಸೂರ್ಯನು ಚಲಿಸುವ ಮಾರ್ಗ, ಸೂರ್ಯನು ಕಟಕ ಸಂಕ್ರಾಂತಿಯಿಂದ ದಕ್ಷಿಣದತ್ತ ವಾಲಿ ಚಲಿಸುತ್ತಿದ್ದು, ಮಕರ ಸಂಕ್ರಾಂತಿಯಿಂದ ತನ್ನ ಮಾರ್ಗವನ್ನು ಬದಲಾಯಿಸಿ, ಉತ್ತರದ ಕಡೆ ವಾಲಿ ಚಲಿಸುತ್ತಾನೆ. ಹಗಲು ಜಾಸ್ತಿಯಾಗಿ, ಕತ್ತಲು ಕಡಿಮೆಯಾಗುತ್ತದೆ. ದೇವತೆಗಳಿಗೆ ಹಗಲು, ರಾಕ್ಷಸರಿಗೆ ರಾತ್ರಿ ಪ್ರಾರಂಭವೆಂದು ಪುರಾಣದಲ್ಲಿದೆ. ದಕ್ಷಿಣಾಯನದಲ್ಲಿ ಮುಚ್ಚಿದ ಸ್ವರ್ಗದ ಬಾಗಿಲು, ಈ ಉತ್ತರಾಯಣದಲ್ಲಿ ತೆರೆಯುತ್ತದೆ. ಈ ದಿನ ಶ್ರೀರಾಮ ರಾವಣನನ್ನು ಸಂಹರಿಸಿ ಸೀತೆಯನ್ನು ತಂದ ದಿನವೆಂದು ಹೇಳುತ್ತಾರೆ. ಅಲ್ಲದೆ ಸ್ವರ್ಗಸ್ಥರಾದ ಪಿತೃಗಳು ಅದೃಶ್ಯರಾಗಿ ಈ ದಿನ ತಮ್ಮ-ತಮ್ಮ ಮನೆಯಂಗಳಕ್ಕೆ ಬರುತ್ತಾರೆಂದು ಹೇಳಲಾಗುತ್ತದೆ.
ಇದು ಕೇವಲ ಆಚರಣೆಯಲ್ಲ. ಋತು ಚಕ್ರದ ಬದಲಾವಣೆ. ಸೂರ್ಯ ಕರ್ಕಾಟಕ ಸಂಕ್ರಾಂತಿ ವೃತ್ತದಿಂದ ಮಕರ ಸಂಕ್ರಾಂತಿ ವೃತ್ತದ ಕಡೆಗೆ ತನ್ನ ಗತಿ ಬದಲಾವಣೆ ಮಾಡಿಕೊಳ್ಳತ್ತಾನೆ. ಇದು ಉತ್ತರ ಗೋಳಾರ್ಧದಲ್ಲಿ ಚಳಿಗೆ ವಿದಾಯ ಹೇಳುವ ಸಮಯ. ರೈತರಿಗೆ ಬೆಳೆ ಮನೆಗೆ ತರುವ ಸುಗ್ಗಿಯ ಸಂಭ್ರಮದ ಆಚರಣೆಗೆ ಕಳೆ ಬರುತ್ತದೆ.
ಮತ್ತೊಮ್ಮೆ
*ತಮಗೆಲ್ಲರಿಗೂ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು*.
ಎಳ್ಳು ಬೆಲ್ಲ ತಿಂದು *ಒಳ್ಳೊಳ್ಳೆ* ಮಾತನಾಡೋಣ.
No comments:
Post a Comment