Friday, February 28, 2025

 ಕಥೆ-677

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಶುಭಾಶಯಗಳು


ವಿಜ್ಞಾನವನ್ನು ನಾವು ಯಾಕೆ ಗೌರವಿಸಬೇಕು ಅಂದರೆ ವಿಜ್ಞಾನ ನಮ್ಮನ್ನು ನಾಗರೀಕರನ್ನಾಗಿ ಮಾಡಿದೆ. ನಮ್ಮಲ್ಲಿ “ವೈಜ್ಞಾನಿಕ ಶೋಧ ಬುದ್ದಿ ಇಲ್ಲದೇ ಇದ್ದಿದ್ದರೆ ನಾವೂ ಇತರ ಪ್ರಾಣಿಗಳ ಹಾಗೆ ಗುಹೆಯಲ್ಲೊ ಮರದ ಪೊಟರೆಯಲ್ಲೊ, ಬಂಡೆಗಳ ಸಂದುಗಳಲ್ಲೊ, ಚಳಿಗೆ ಮಳೆಗೆ, ರೋಗರುಜಿನಗಳಿಗೆ ತುತ್ತಾಗುತ್ತ ಹೇಗೋ ಬದುಕುತ್ತಿದ್ದೆವು.


ಜೀವನದಲ್ಲಿ ಅದರ ವಿಜ್ಞಾನದ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವುದು.


ಮೂಢನಂಬಿಕೆ ಹೋಗಲಾಡಿಸುವುದು,


ವಿಜ್ಞಾನವನ್ನು ತಮ್ಮ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಕ್ಕಳನ್ನು ಪ್ರೋತ್ಸಾಹಿಸಲಾಗುತ್ತದೆ. ಆದ್ದರಿಂದ ನಮ್ಮ ದೇಶದ ಮುಂಬರುವ ಪೀಳಿಗೆಯು ವಿಜ್ಞಾನ ಕ್ಷೇತ್ರದಲ್ಲಿ ಕೊಡುಗೆ ನೀಡಬಹುದು...


ಪ್ರತಿ ವರ್ಷ ಫೆಬ್ರವರಿ 28 ನೇ ದಿನಾಂಕವನ್ನು ರಾಷ್ಟ್ರೀಯ ದಿನವನ್ನಾಗಿ ಆಚರಿಸಲಾಗುತ್ತಿದೆ. ನಮ್ಮ ನಿತ್ಯ ಜೀವನದಲ್ಲಿ ವಿಜ್ಞಾನದ ಮಹತ್ವ ಮತ್ತು ಜನ ಸಾಮಾನ್ಯರಲ್ಲಿ ವಿಜ್ಞಾನದ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಉದ್ದೇಶವಾಗಿದೆ. 


ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ. ಅವರು 1928ರ ಫೆಬ್ರವರಿ 28ರಂದು 'ರಾಮನ್ ಎಫೆಕ್ಟ್' ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು. ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ.ವಿ.ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ ಎಂದು. ಅವರು ಜನಿಸಿದ್ದು ತಮಿಳುನಾಡಿನ ತಿರುಚಿನಾಪಲ್ಲಿಯಲ್ಲಿ. 1888 ರ ನವೆಂಬರ್ 7 ರಂದು. ಅವರ ತಂದೆ ಚಂದ್ರಶೇಖರ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ನೋಬೆಲ್ ಪ್ರಶಸ್ತಿ ಪಡೆದ ಮತ್ತೋರ್ವ ವಿಜ್ಞಾನಿ ಸುಬ್ರಮಣ್ಯಂ ಚಂದ್ರಶೇಖ‌ರ್ ಅವರು ಸಿ.ವಿ.ರಾಮನರ ಸ್ವಂತ ಅಣ್ಣನ ಮಗ. ಅಂದಿನ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಮುಗಿಸಿದ ರಾಮನ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸ್ಥಾನ ಗಳಿಸುವ ಮೂಲಕ ಕಲ್ಕತ್ತೆಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಜನರಲ್ ಆಗಿ ನೇಮಕಗೊಂಡರು. ಸರಕಾರದಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅವರಲ್ಲಿ ವಿಜ್ಞಾನದ ಕಡೆಗಿನ ತುಡಿತ ಹಾಗೆಯೇ ಉಳಿದಿತ್ತು. ಅದರ ಪರಿಣಾಮವಾಗಿ ಅವರು ತಮ್ಮ ಇನ್ಸಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಬೆಂಗಳೂರಿಗೆ ಬಂದರು. ವಿವಿಧ ಸಂಶೋಧನೆಗಳಲ್ಲಿ ಮಗ್ನರಾಗಿದ್ದರು.


ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ

 ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು. ಕೋಲ್ಕತ್ತಾದ ಇಂಡಿಯನ್ ಅಸೋಸಿಯೇಶನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ 1930 ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಅದರಲ್ಲೂ ಏಷ್ಯಾ ಖಂಡಕ್ಕೆ ಭೌತಶಾಸ್ತ್ರದಲ್ಲಿ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.


ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನಾವು ನೋಡಬಹುದು ಹೀಗೆ (ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವ ಉದಾಹರಣೆ ನೆನಪಿಸಿಕೊಳ್ಳಿ) ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ. ರಾಮನ್ ಪರಿಣಾಮವೆಂದು ಕರೆಯುವುದು ಇದನ್ನೇ. ತರಂಗಾಂತರದಲ್ಲಿನ ಈ ಬದಲಾವಣೆಗೂ ಪಾರದರ್ಶಕ ವಸ್ತುವಿನ ರಚನೆಗೂ ಸಂಬಂಧವಿರುವುದರಿಂದ ಈ ವಿದ್ಯಮಾನವನ್ನು ಅಧ್ಯಯನಮಾಡುವ ಮೂಲಕ ವಸ್ತುವಿನ ರಚನೆಯ ಬಗ್ಗೆ ತಿಳಿದುಕೊಳ್ಳುವುದು ಸಾಧ್ಯವಾಗುತ್ತದೆ. ರಾಮನ್ ಪರಿಣಾಮದ ಕುರಿತು ವಿವರಗಳು ಪ್ರಕಟವಾದ ಕೇವಲ ಹನ್ನೆರಡು ವರ್ಷಗಳ ಅವಧಿಯಲ್ಲಿಯೇ ಆ ವಿದ್ಯಮಾನವನ್ನು ಕುರಿತು ಬೇರೆ ಬೇರೆ ದೇಶದ ವಿಜ್ಞಾನಿಗಳು ಬರೆದ 1800 ಪ್ರೌಢಪ್ರಬಂಧಗಳು ಪ್ರಕಟವಾದವು ಎಂದು ದಾಖಲೆಗಳು ಹೇಳುತ್ತವೆ. ಅಷ್ಟೇ ಅಲ್ಲ, ರಾಮನ್ ಅವರ ಅಧ್ಯಯನಗಳ ಫಲವಾಗಿ ಅದೇ ಅವಧಿಯಲ್ಲಿ ಸಾವಿರಾರು ರಾಸಾಯನಿಕ ಸಂಯುಕ್ತಗಳ ರಚನೆಯನ್ನು ಅಭ್ಯಾಸಮಾಡುವುದೂ ಸಾಧ್ಯವಾಯಿತು. ತಮಿಳುನಾಡಲ್ಲಿ ಹುಟ್ಟಿದರೂ ಕರುನಾಡಿನಲ್ಲಿ ನೆಲೆಸಿದ್ದ ಚಂದ್ರಶೇಖರ ವೆಂಕಟರಾಮನ್ ಕರ್ನಾಟಕವನ್ನು ವಿಶ್ವವಿಜ್ಞಾನ ಭೂಪಟದಲ್ಲಿ ಚಿತ್ರಿಸಿದ ಭೌತವಿಜ್ಞಾನಿ. ಶಬ್ದ, ಬೆಳಕು, ಸ್ವರ, ನಾದಗಳಿಗೆ ವರ್ಣಮಯ ಬೆಳಕು ಚೆಲ್ಲಿದ ಧೀಮಂತ ಸಂಶೋಧಕ. ಭೌತವಿಜ್ಞಾನಕ್ಕೆ ಹೊಸ ಆಯಾಮ ನೀಡಿ. ಭೌತ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಹೆಸರು ಚಿರಸ್ಥಾಯಿಯಾಗಿ ನೆಲೆಗೊಳಿಸಿ. ಶಾಶ್ವತ ಕೀರ್ತಿ ಪಡೆದ ವಿಜ್ಞಾನಿ. 


 1970 ರಲ್ಲಿ ವಿಧಿವಶರಾದರು.


ಸಂದ ಪ್ರಶಸ್ತಿಗಳು: "ಫೆಲೋ ಆಫ್ ರಾಯಲ್ ಸೊಸೈಟಿ ಸದಸ್ಯತ್" (1924), "ನೈಟ್ ಹುಡ್ ಪ್ರಶಸ್ತಿ" (1929), "ನೋಬೆಲ್ ಪ್ರಶಸ್ತಿ" (1930), "ಮೈಸೂರು ಮಹಾರಾಜ" ರಿಂದ "ರಾಜ ಸಭಾ ಭೂಷಣ ಗೌರವ" (1935), "ಭಾರತ ರತ್ನ ಪ್ರಶಸ್ತಿ (1954)


- Shankargouda Basapur

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು