ಕಥೆ-1037
ಸೇವಾಲಾಲ್ ಜಯಂತಿ ಶುಭಾಶಯಗಳು
https://basapurs.blogspot.com/
ಈ ನಮ್ಮ ದೇಶದ ನೆಲ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿದ್ದು ಈ ವೈವಿಧ್ಯತಾ ಸಂಸ್ಕೃತಿಗೆ ಹಲವಾರು ಸಾಂಸ್ಕೃತಿಕ ರಾಯಭಾರಿಗಳು ಕಾರಣೀಭೂತರು, ಭಾರತ ನೆಲದಲ್ಲಿ ಹಲವು ಸಂತರು, ಧರ್ಮ ಸುಧಾರಕರು, ತತ್ವಜ್ಞಾನಿಗಳು ಜನ್ಮ ತಾಳಿ ಜನರಲ್ಲಿನ ತಮಂಧತೆಯನ್ನು ಹೋಗಲಾಡಿಸಿದ್ದಾರೆ. ಇಂತಹ ಮಹಾನ್ ಸಂತರುಗಳಲ್ಲಿ ಲಂಬಾಣಿ ಸಮುದಾಯದ ಆರಾಧ್ಯ ದೈವ ಸದ್ಗುರು ಸಂತ ಸೇವಾಲಾಲ್ ಮಹಾರಾಜರು ಒಬ್ಬರು. ಇದಲ್ಲದೆ ಮಾನವ ಜನ್ಮ ಪವಿತ್ರವಾದದ್ದು ಇದನ್ನು ಹಾಳು ಮಾಡಿಕೊಳ್ಳಬೇಡಿ, ವ್ಯಸನಗಳಿಂದ ದೂರವಿರಿ (ದಾರು, ಗಾಂಜಾ ಮತ್ ಪೀವೋ) ಅರಿಷಡ್ ವರ್ಗಗಳನ್ನು ಸುಟ್ಟು ಹಾಕಿ (ಕಾಮ ಕ್ರೋಧೇರಿ ಧೂಣಿ ಬಾಳೋ), ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿರಿ ಎಂದು ತಿಳಿಸಿದರು. ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು. ಇಂತಹ ಮಹನೀಯರನ್ನು ಒಂದು ಜಾತಿ ಅಥವಾ ಧರ್ಮಕ್ಕೆ ಮೀಸಲಾಗಿಸದೇ ಸರ್ವರ ಸಾಂಸ್ಕೃತಿಕ ಹಾಗೂ ಧಾರ್ಮಿಕ ರಾಯಭಾರಿಗಳಾಗಿ ಸ್ವೀಕರಿಸಿದಾಗ ಮಾತ್ರವೇ ಸಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸರ್ವರಿಗೂ ಸಮಸ್ತ ಸದ್ಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ 285ನೇ ಜಯಂತಿಯ ಭಕ್ತಿ ಪೂರ್ವಕ ಶುಭಾಶಯಗಳು.
- ಶಂಕರಗೌಡ ಬಸಾಪೂರ
No comments:
Post a Comment